ಪತ್ರಿಕಾಗೋಷ್ಟಿಯಲ್ಲಿ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಮಾಹಿತಿ
ಶಿವಮೊಗ್ಗ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಸಂಯುಕ್ತ ಹೋರಾಟ-ಕರ್ನಾಟಕ, ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಮತ್ತಯ ರಾಜ್ಯ ಸರ್ಕಾರಗಳ ವಿರುದ್ಧ ಸುಮಾರು 25 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.26 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ-ಕಾರ್ಮಿಕರ ಎಚ್ಚರಿಕಾ ರ್ಯಾಲಿಯನ್ನು ಹಮ್ಮಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು.
ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಕಾರ್ಮಿಕರ ಸಮಸ್ಯೆಗಳು ಕೂಡ ಹಾಗೆಯೇ ಇವೆ. ವೈಜ್ಞಾನಿಕ ಬೆಲೆ ಇಲ್ಲ. ಕಾರ್ಮಿಕರಿಗೆ ಕನಿಷ್ಠ ವೇತನ ಇಲ್ಲ. ವಿದೇಶಿ ಕಂಪನಿಗಳ ಮಾಲ್ ಸಂಸ್ಕøತಿಯಿಂದಾಗಿ ಸ್ಥಳೀಯ ವ್ಯಾಪಾರಸ್ಥರು, ರೈತರು ಸಂಕಷ್ಟದಲ್ಲಿದ್ದಾರೆ. ಅದರಲ್ಲೂ ವ್ಯಾಪಾರಸ್ಥರು ಅಂಗಡಿ ಮುಚ್ಚ ಬೇಕಾದ ದುಃಸ್ಥಿತಿ ಬಂದಿದೆ ಎಂದು ಆರೊಪಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಟ್ಟ ಮಾತಿಗೆ ತಪ್ಪಿ ನಡೆಯುತ್ತಿವೆ. ಚುನಾವಣೆ ಮತ್ತು ರೈತರ ಹೋರಾಟದ ಸಂದರ್ಭಗಳಲ್ಲಿ ಲಿಖಿತ ರೂಪದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿಲ್ಲ.ಬೇಡಿಕೆಗಳೆಲ್ಲವೂ ಹಾಗೆಯೇ ಉಳಿದುಕೊಂಡಿವೆ. ಹೀಗಾಗಿ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಾರ್ಮಿಕ ಸಂಘಟನೆಗಳ ಒಕ್ಕೂಟ ಜೆಸಿಟಿಯು ದೇಶದ 500 ಜಿಲ್ಲೆಗಳಲ್ಲಿ ಎಚ್ಚರಿಕೆ ರ್ಯಾಲಿ ನಡೆಸಲು ನಿರ್ಧರಿಸಿದೆ.
ಕಳಸ – ಬಂಡೂರಿ ಮಹಾದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಎಂ.ಎಸ್.ಪಿ.ಯನ್ನು ಕಾನೂನುಬದ್ಧ ಮಾಡಬೇಕು. ಬೆಳೆ ವಿಮೆ ಜಾರಿಯಾಗಬೇಕು. ವಿದ್ಯುತ್ ಖಾಸಗೀಕರಣ ಆಗಬಾರದು, ಕೃಷಿ ಉಪಕರಣಗಳ ಮೇಲಿ ಜಿ.ಎಸ್.ಟಿ. ರದ್ದು ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್ ಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಅನ್ನು ಪರಿಗಣನೆ ಮಾಡಬಾರದು. ರೈತರ ಬೆಳೆಗಳಿಗೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.
ಮುಳುಗಡೆ ಹಾಗೂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ನೀರಾವರಿ ಯೋಜನೆಗಳು ಜಾರಿಯಾಗಬೇಕು. ಕಾರ್ಮಿಕ ವಿರೋಧಿ ಕಾಯ್ದೆ ರದ್ದಾಗಬೇಕು. ಉದ್ಯೋಗ ಭದ್ರತೆ ಸಿಗಬೇಕು. ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 – 18 ಗಂಟೆಯವರೆಗೆ ಏರಿಸಲಾಗಿದೆ. ಇದನ್ನು ಹಿಂಪಡೆಯಬೇಕು. ಎಲ್ಲರಿಗೂ ಉಚಿತ ಆರೋಗ್ಯ, ಶಿಕ್ಷಣ ನೀಡಬೇಕು ಎಂಬುದು ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ಕೆ.ರಾಘವೇಂದ್ರ, ಕೆ.ರುದ್ರೇಶ್, ಎನ್.ಡಿ.ನಾಗರಾಜ್, ಚಂದ್ರಪ್ಪ, ಸೇರಿದಂತೆ ಹಲವರಿದ್ದರು.