ಹೊಸದಿಲ್ಲಿ: ಬೈಂದೂರಿನಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಇಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಈ ಮನವಿಯನ್ನು ಸಲ್ಲಿಸಲಾಯಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುವುದರಿಂದ ಪ್ರವಾಸಿಗಳ ಅನುಕೂಲಕ್ಕಾಗಿ ಇದರ ಅಗತ್ಯವಿದೆ ಎಂದು ಕೇಂದ್ರ ಸಚಿವರಿಗೆ ಮನವಿಯಲ್ಲಿ ವಿವರಿಸಲಾಗಿದೆ.
ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಲಾಗಿದೆ.
ಮನವಿಯ ಬಗ್ಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ ಎಂದು ಸಂಸದರು ಹೇಳಿದ್ದಾರೆ.