ಶಿವಮೊಗ್ಗ: ಹಾಸ್ಟೇಲ್ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲ್ ಗಳಿಗೆ ಪ್ರವೇಶಾತಿ ನೀಡಬೇಕು. ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಮತ್ತು ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿ ನಗರ ಯುವ ಜನತಾದಳದಿಂದ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳುಗಳ ವರೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ. ಜೂನ್ ತಿಂಗಳಲ್ಲಿ ಶಾಲೆ-ಕಾಲೇಜುಗಳು ಪ್ರಾರಂಭವಾದರೂ ಸಾವಿರಾರು ವಿದ್ಯಾರ್ಥಿಗಳು ಎಲ್ಲಿ ಉಳಿದುಕೊಂಡು ಶಿಕ್ಷಣವನ್ನು ಪಡೆಯಬೇಕು. ಈ ಕೂಡಲೇ ಹಾಸ್ಟೆಲ್ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಪ್ರವೇಶಾತಿ ಕಲ್ಪಿಸಬೇಕೆಂದು ಯುವಜನತಾದಳ ಒತ್ತಾಯಿಸುತ್ತದೆ ಎಂದು ನಗರ ಯುವ ಜನತಾದಳದ ಅಧ್ಯಕ್ಷ ಸಂಜಯ್ ಕಶ್ಯಪ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಹಾಸ್ಟೆಲ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ 40% ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳನ್ನ ಕಲ್ಪಿಸಿ ಕೊಡುವ ವ್ಯವಸ್ಥೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಲಭ್ಯವಿದೆ. ಆದರೆ ಇನ್ನುಳಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿ ತಮ್ಮ ಉನ್ನತ ಶಿಕ್ಷಣವನ್ನು ಪಡೆಯಲು ಕಷ್ಟಕರವಾಗುತ್ತಿದೆ. ಸರ್ಕಾರ ಕೂಡಲೇ ಹಾಸ್ಟೆಲ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಹೆಚ್ಚಳ ಮಾಡಬೇಕು ಹಾಗೂ ಈಗಿರುವ ಹಾಸ್ಟೆಲ್ ಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.
ಕಳೆದ ವರ್ಷದ ವಿದ್ಯಾರ್ಥಿ ವೇತನ ಜಮೆಯಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೆ ಇರುವುದು, ರೈತ ವಿದ್ಯಾನಿಧಿಯನ್ನ ರದ್ದುಗೊಳಿಸಿರುವುದು ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ವಿದ್ಯಾರ್ಥಿ ವೇತನ್ನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ತಮ್ಮ ಬೇಡಿಕೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು.
ಪ್ರತಿಬಟನೆಯ ನೇತೃತ್ವವನ್ನು ನಗರ ಯುವ ಜನತಾದಳದ ಅಧ್ಯಕ್ಷ ಸಂಜಯ್ ಕಶ್ಯಪ್, ಜಿಲ್ಲಾಧ್ಯಕ್ಷ ಮಧುಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎಲ್.ನಿಖಿಲ್ ವಹಿಸಿದ್ದರು.