ಆನಂದಪುರ: ಜಿಲ್ಲೆಯಲ್ಲಿ ಭಾರೀ ಸದ್ದು ಮಾಡಿದ್ದ ಪ್ರಿಯತಮೆಯನ್ನ ಪ್ರಿಯಕರನೇ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವವನ್ನು ಇಂದು ಪೊಲೀಸರು ಹೊರತೆಗೆದು ಮಹಜರ್ ನಡೆಸಿದ್ದಾರೆ.
ಆನಂದಪುರದ ಬಳಿಯ ಮದ್ಲೆಸರ ಬಳಿಯ ರೈಲ್ವೆ ಹಳಿ ಬಳಿ ಸುಜನ್ ಸೌಮ್ಯಳ ಮೃತದೇಹವನ್ನ ಹೂತು ಇಟ್ಟಿದ್ದನು. ಇಂದು ನ್ಯಾಯಾಲಯದ ಆದೇಶದ ಮೇರೆಗೆ ಹೊರತೆಗೆದಿದ್ದಾರೆ.
ಇಂದು ಸಾಗರ ಎಸಿ ಯತೀಶ್ ಆರ್ ಸಮ್ಮುಖದಲ್ಲೇ ಸ್ಥಳ ಪರಿಶೀಲನೆ ನಡೆಸಿ ಸೌಮ್ಯ ಮೃತದೇಹವನ್ನು ಹೊರ ತೆಗೆಯಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ವೈದ್ಯರು ಭೇಟಿ ನೀಡಿದ್ದಾರೆ. ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸಾಗರ ತಹಶಿಲ್ದಾರ್ ಚಂದ್ರಶೇಖರ್ ಸ್ಥಳದಲ್ಲಿ ಉಪಸ್ಥಿತರಿದ್ದರು.
ಘಟನೆ ಹಿನ್ನಲೆ
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ಯುವತಿ ನಾಪತ್ತೆ ಪ್ರಕರಣವೊಂದು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಯುವತಿಯ ಕೊಲೆ ಪ್ರಕರಣ ಬಯಲಿಗೆ ಬಂದಿತ್ತು. ಅನಂದಪುರ ಸಮೀಪ ಕೊಲೆಯಾಗಿದ್ದು, ಆಕೆಯ ಮೃತದೇಹವನ್ನು ಹೂಳಲಾಗಿದೆ ಎಂಬ ಅಂಶ ಬೆಳಕಿಗೆ ಬಂದಿತ್ತು. ಯುವತಿಯನ್ನು ಹತ್ಯೆ ಮಾಡಿದ ಆರೋಪಿ ಈಗ ಪೊಲೀಸರ ಅತಿಥಿಯಾಗಿದ್ದ.
ಸಾಗರ ಮೂಲದ ಯುವಕ ಹಾಗೂ ಕೊಪ್ಪ ತಾಲ್ಲೂಕು ಮೂಲದ ಯುವತಿ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸಿದ್ದರು. ಇಬ್ಬರು ಬೇರೆ ಬೇರೆ ಸಮುದಾಯದವರಾಗಿದ್ದು ಯುವತಿ ದಲಿತ ಸಮುದಾಯಕ್ಕೆ ಸೇರಿದವಳು ಎನ್ನಲಾಗಿದೆ.
ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು ಎನ್ನಲಾಗಿದೆ.
ಜುಲೈ 2 ರಂದು ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಾಳೆ.
ಸೃಜನ್ ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಸೌಮ್ಯಳನ್ನು ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಈತ ತನಗೆ ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ಸೌಮ್ಯ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಸೃಜನ್ ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ. ನಂತರ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ.
ಮತ್ತೊಂದೆಡೆ ಸೌಮ್ಯಳ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ನಂತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.