ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ತಮ್ಮನ್ನು ಭೇಟಿ ಮಾಡಿ ಸಲ್ಲಿಸಿದ ಸಂದರ್ಭದಲ್ಲಿ
ಮಾತನಾಡಿದ ಅವರು, ಎಲ್ಲಾ ಸಂದರ್ಭಗಳಲ್ಲಿಯೂ ಸರ್ಕಾರದ ಜೊತೆಗಿದ್ದು ಕಾರ್ಯನಿರ್ವಹಿಸುವ ನೌಕರರ ಹಿತಕಾಯುವಲ್ಲಿಯೂ ಸರ್ಕಾರ ವಿಶೇಷ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ನೌಕರರ ನ್ಯಾಯೋಚಿತ ಬೇಡಿಕೆಯನ್ನು ಸದನದಲ್ಲಿ ಪ್ರಸ್ತಾಪಿಸಲು ನಾನು ಸಿದ್ದನಿದ್ದೇನೆ ಎಂದರು.
ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾಯಾರ್ಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಶಾಸಕರಿಗೆ ಮನವಿ ಸಲ್ಲಿಸಿದ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷ ಆರ್.ಮೋಹನ್ಕುಮಾರ್ ಅವರು ಮಾತನಾಡಿ, ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು. ಈಗಾಗಲೇ ಆಯೋಗವು ವರದಿ ನೀಡಿ ಅನೇಕ ತಿಂಗಳುಗಳೇ ಉರುಳಿವೆ. ಇನ್ನೂ ಕಾಲ ವಿಳಂಬವನ್ನು ನಾವು ಒಪ್ಪಿಕೊಳ್ಳಲಾಗುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಕೋಶಾಧ್ಯಕ್ಷ ಎಸ್.ಆರ್.ನರಸಿಂಹಮೂರ್ತಿ, ಕಾರ್ಯಾಧ್ಯಕ್ಷ ಡಾ|| ಸಿ.ಎ.ಹಿರೇಮಠ್, ಗೌರವಾಧ್ಯಕ್ಷ ಆರ್.ಪಾಪಣ್ಣ, ಹಿರಿಯ ಉಪಾಧ್ಯಕ್ಷ ಕೆ.ಪ್ರಸನ್ನ ಸೇರಿದಂತೆ ಸಹಸ್ರಾರು ಸಂಖ್ಯೆಯ ಉಪಸ್ಥಿತರಿದ್ದರು. ಶಾಸಕರಿಗೆ ಮನವಿ ನೀಡಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.