
ಸೊರಬ : ಸೊರಬ ಪುರಸಭೆಯ 10ನೇ ಅವಧಿಯ ಮೀಸಲಾತಿಗೆ ಇಂದು ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಪುರುಷ ಸ್ಥಾನಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಬಿಜೆಪಿ ಪಕ್ಷದ ಪ್ರಭು ವೆಂಕಟರಾಮನ್, ಸಾಮಾನ್ಯ ಮಹಿಳೆ ಸ್ಥಾನದ ಉಪಾಧ್ಯಕ್ಷ ಸ್ಥಾನಕ್ಕೆ 8 ಜನ ಸದಸ್ಯರು ಕೈಎತ್ತುವ ಮೂಲಕ ಕಾಂಗ್ರೆಸ್ ಪಕ್ಷದ ಶ್ರೀರಂಜಿನಿ ಪ್ರವೀಣ್ಕುಮಾರ್ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿಗಳಾದ ಸಾಗರ ಉಪ ವಿಭಾಗಾಧಿಕಾರಿಗಳು ಘೋಷಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಈಗಿನ ಸರ್ಕಾರದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ನೀಡದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರ ಎತ್ತ ಸಾಗುತ್ತಿದೆ ಎಂಬುದನ್ನು ಎತ್ತಿ ತೋರಿಸುತ್ತಿದೆ. ಆದರೆ ಭಾಗ್ಯಗಳ ಹೆಸರಿನಲ್ಲಿ ಉಸಿರಾಡುತ್ತಿದೆಯೇ ಹೊರತು ಯಾವುದೇ ಹೊಸ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿಲ್ಲ ಎಂದು ಆಪಾದಿಸಿದರು. ಇಂತಹ ಪರಿಸ್ಥಿತಿಯಲ್ಲಿಯೂ ಕೂಡಾ ವಿಧಾನ ಪರಿಷತ್ ಅನುದಾನದಲ್ಲಿ ಪಟ್ಟಣವನ್ನು ಅಭಿವೃದ್ಧಿ ಪಡಿಸಲು ಶ್ರಮವಹಿಸಲಾಗುವುದು ಎಂದರು.
ಮಡಿವಾಳ ಮಾಚಿದೇವ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು ಮಾತನಾಡಿ, ಶಿಕ್ಷಣ ಮಂತ್ರಿಗಳ ಸ್ವಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿ ಸಿಇಟಿ ಪರೀಕ್ಷೆ ಎದುರಿಸುವಂತಾಗಿರುವುದು ಶೋಚನೀಯ ಸಂಗತಿ ಎಂದ ಅವರು, ಇದರ ಸಂಪೂರ್ಣ ಜವಾಬ್ದಾರಿ ಹೊತ್ತು ತಕ್ಷಣ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀರಂಜಿನಿ ಪ್ರವೀಣ್ಕುಮಾರ್ ಮಾತನಾಡಿ, ಶಿಕ್ಷಣ ಸಚಿವರ ಸಲಹೆ ಸಹಕಾರವನ್ನು ಪಡೆದು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮುಖಂಡರು-ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರು ಸಂಭ್ರಮಪಟ್ಟರು.